ಶ್ರೀ ಕನಕದಾಸರು :-



ಶ್ರೀ ಕನಕದಾಸರು (೧೫೦೯-೧೬೦೯) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
(PSGadyal Teacher Vijayapur)

ಜೀವನ

ಜನನ

ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜಾತಿಗೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪ ಎಂಬ ದಂಪತಿಗಳ ಮಗನಾಗಿ ಜನಿಸಿದರು.

ಸಾಧನೆ

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ.

ಕನಕನ ಕಿಂತಿಂಡಿ.

ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು. ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).

ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ ಪ್ರಸ್ತಾಪವಾಗಿಲ್ಲ.
ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ.
ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ ೧೧೬೦ ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ ತೀರ್ಥರ ಹೇಳಿಕೆ.
ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ ಸ್ಥಾಪಿಸಬೇಕೆಂಬ ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.
ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ ಒಂದೇ ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. ೧೨೦ ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ.
ಕೃಷ್ಣನ ಮೂರ್ತಿಯ ಎದುರು ದರ್ಶನಾಪೇಕ್ಷೀ ಭಕ್ತರ ಅನುಕೂಲಕ್ಕಾಗಿ ಇದ್ದ ಧೂಳೀ ದರ್ಶನ ಕಿಂಡಿಯ ಬಳಿ ವಾದಿರಾಜರೂ ಕನಕದಾಸರೂ ಲೋಕಾಭಿರಾಮದ ಮಾತುಗಳನ್ನಾಡುತ್ತಿದ್ದರು. ಅದೇ ಕಿಂಡಿಯೇ ಮುಂದೆ ಕನಕನ ಕಿಂಡಿಯಾಯಿತೇ ಹೊರತು ಸಿನಿಮೀಯವಾಗಿ ಅಲ್ಲ. ಕನಕದಾಸರು ಪುಣ್ಯ ಪುರುಷರೆಂದು ಬಿಂಬಿಸಲು ಅವರ ಕಾವ್ಯಕೃಷಿಯೇ ಮಹತ್ವದ ಸಾಕ್ಷಿ.
ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ.

ಸಾಹಿತ್ಯ ರಚನೆ

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ.

ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

ಮೋಹನತರಂಗಿಣಿ
ನಳಚರಿತ್ರೆ
ರಾಮಧಾನ್ಯ ಚರಿತೆ
ಹರಿಭಕ್ತಿಸಾರ
ನೃಸಿಂಹಸ್ತವ (ಉಪಲಬ್ದವಿಲ್ಲ)
ಮೋಹನತರಂಗಿಣಿ ಸಂಪಾದಿಸಿ
ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2700 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.
(PSGADYAL Teacher Vijayapur )

ಸೋಮಸೂರಿಯ ವೀಥಿಯ ಇಕ್ಕೆಗಳಲಿ
ಹೇಮ ನಿರ್ಮಿತ ಸೌಧದೋಳಿ
ರಮಣೀಯತೆವೆತ್ತ ಕಳಸದಂಗಡಿಯಿರ್ದುಂ
ವಾ ಮಹಾ ದ್ವಾರಕಾಪುರದೇ
ಓರಂತೆ ಮರಕಾಲರು ಹಡಗಿನ ವ್ಯವ
ಹಾರದಿ ಗಳಿಸಿದ ಹಣವ
ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು
ಬೇರಂಗೆ ಕಡವ ಕೊಡುವರು

ನಳಚರಿತ್ರೆ

ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆವೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ:

ಲಲಿತ ಹೇಮದ ತೂಗಮಂಚದ
ಹೊಳೆವ ಮೇಲ್ವಾಸಿನಲಿ ಮಲಗು
ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨)
ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ.

ರಾಮಧಾನ್ಯಚರಿತೆ .

ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ.

ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ?
ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ
ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು..
ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು.

ಹರಿಭಕ್ತಿಸಾರ

ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.

ಕೀರ್ತನೆಗಳು

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.

ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.

'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.
ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣ ಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.

ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ .
ತೀರ್ಥವನು ಪಿಡಿದವರು ತಿರುನಾಮಧಾರಿಗಳೇ
ಜನ್ಮ ಸಾರ್ಥಕವಿರದವರು ಭಾಗವತರಹುದೇ
ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ .
ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ ಸಂಪಾದಿಸಿ
ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೂ
ಬಯಲು ಆಲಯದೊಳಗೊ, ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ ಸಂಪಾದಿಸಿ
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ

ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ

ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು

ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು

ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು

ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/

ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು

ದಾಯಾದಿ ಬಂಧುಗಳ ಬಿಡಲೂ ಬಹುದು

ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು

ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/

ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು

ಮಾನದಲಿ ಮನವ ತಗ್ಗಿಸಬಹುದು

ಜಾಣ ನಾಯಕನಾದ ಆದಿಕೇಶವರಾಯ

ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩/

ಕನಕದಾಸರ ಕೃತಿಗಳ ಅನುವಾದ ಸಂಪಾದಿಸಿ

ಇಂಗ್ಲಿಷಿಗೆ
J.Aravinda Raman

ಸಂಸ್ಕೃತಕ್ಕೆ ಸಂಪಾದಿಸಿ
ಹರಿಭಕ್ತಿಸಾರ, ಆರ್. ಗಣೇಶ್, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ಕನಕದಾಸರನ್ನು ಕುರಿತ ಕೃತಿಗಳು

ಕನ್ನಡದಲ್ಲಿ

ಕನಕವಾಣಿ, ಸಂ: ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಸಂತ ಶ್ರೀ ಕನಕದಾಸರ ಜೀವನ ಸಂದೇಶ, ಸಂ: ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಸಂತ ಶ್ರೀ ಕನಕದಾಸರ ಸಾಹಿತ್ಯ ದರ್ಶನ, ಸಂ: ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಸಂತ ಶ್ರೀ ಕನಕದಾಸರ ಪಾರಂಪರಿಕ ಸ್ಥಳಗಳು, ಜಗನ್ನಾಥ ಆರ್. ಗೇನಣ್ಣವರ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನಕದಾಸ, ಕಾ.ತ. ಚಿಕ್ಕಣ್ಣ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ರಾಮಧಾನ್ಯ (ನಾಟಕ), ರಾಮಕೃಷ್ಣ ಮರಾಠೆ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನಕ ಶತಕ (ಕಾವ್ಯ), ಮಂಜುನಾಥ ಬೆಳವಾಡಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನಕದಾಸರ ಕೃತಿಗಳಲ್ಲಿ ಸಮಾನತಾ ಸಮಾಜ, ನರಸಿಂಹಮೂರ್ತಿ ಹೂವಿನಹಳ್ಳಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ನಳಚರಿತ್ರೆ: ಒಂದು ಹೊಸನೋಟ, ಬಿರಾದಾರ ಬಿ.ಬಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕದಾಸರು ಮತ್ತು ಆಧುನಿಕ ಚಿಂತನೆಗಳು: ಮುಖಾಮುಖಿ, ಶಿರೂರ ಬಿ.ವಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಭಕ್ತಿ ಪರಂಪರೆ ಮತ್ತು ಕನಕದಾಸರು, ಸಂ: ಯಕ್ಕುಂಡಿಮಠ ಬಿ.ವಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕ ಸಾಹಿತ್ಯ ಸೂಚಿ, ಸಂ: ಕೆ. ಮಲ್ಲಿಕಾರ್ಜುನ ಮತ್ತು ದೊಡ್ಡಮನಿ ಸಿ.ಡಿ., ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕದಾಸರ ಸಾಹಿತ್ಯ ಅಧ್ಯಯನ, ಹರಿಲಾಲ ಪವಾರ ಮತ್ತು ಚಂದ್ರಶೇಖರ ರೊಟ್ಟಿಗವಾಡ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಮೋಹನ ತರಂಗಿಣಿ: ಸಾಂಸ್ಕೃತಿಕ ಸಂವಾದ, ರವಿರಾಜ ಶೆಟ್ಟಿ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ರಾಮಧಾನ್ಯ ಚರಿತೆ: ಸಂಘರ್ಷದ ನೆಲೆ, ಸರೋಜಿನಿ ಸಿ. ಹಿರೇಮಠ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಆತ್ಮ ಆವ ಕುಲ (ಕವನ ಸಂಕಲನ), ಸಂ: ಬಾಳಣ್ಣ ಶೀಗೀಹಳ್ಳಿ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಎಲ್ಲಿರುವನೋ ರಂಗ (ನಾಟಕ), ಶಶಿಧರ ನರೇಂದ್ರ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕದಾಸರ ಸಮಗ್ರ ಕಾವ್ಯಾಧ್ಯಯನ, ಭಾಗ-1: ರಾಮಧಾನ್ಯ ಚರಿತೆ, ರವಿ ಬಿ.ಕೆ. ಮತ್ತು ಸರೋಜಿನಿ ಸಿ. ಹಿರೇಮಠ, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕದಾಸರ ಸಮಗ್ರ ಕಾವ್ಯಾಧ್ಯಯನ, ಭಾಗ-2: ನಳಚರಿತ್ರೆ, ರವಿ ಬಿ.ಕೆ. ಮತ್ತು ಡಾ. ಎಚ್.ಎಚ್. ನದಾಫ್, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕ ವಿಜಯ (ಕಾವ್ಯ), ಶ್ರೀ ನಿರುಪಾದೀಶ್ವರ ಮಹಾಸ್ವಾಮಿಗಳು, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಹರಿಭಕ್ತಿಸಾರ, ಎನ್. ರಂಗನಾಥ ಶರ್ಮ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ಕನಕೋಪನಿಷತ್ತು, ಬನ್ನಂಜೆ ಗೋವಿಂದಾಚಾರ್ಯ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ಕನಕ ಕಾವ್ಯ ಸಂಪುಟ, ಎ.ವಿ. ನಾವಡ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ರಾಮಧಾನ್ಯ ಚರಿತೆ (ನಾಟಕ), ಅಂಬಾತನಯ ಮುದ್ರಾಡಿ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ದಾಸ-ಕನಕ ಪ್ರಭೆ, ಹೇರಂಜೆ ಕೃಷ್ಣಭಟ್ಟ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ಕನಕ ಮುಂಡಿಗೆ: ಅರ್ಥಾನುಸಂಧಾನ, ಮಾಧವಿ ಭಂಡಾರಿ, ಪ್ರ: ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ಕನಕ ಚಿಂತನ 2007-08 (ಪ್ರಚಾರೋಪನ್ಯಾಸಗಳ ಸಂಕಲನ), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ಕನಕ ಚಿಂತನ 2009-10 (ಪ್ರಚಾರೋಪನ್ಯಾಸಗಳ ಸಂಕಲನ), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ಕನಕ ಚಿಂತನ 2011-12 (ಪ್ರಚಾರೋಪನ್ಯಾಸಗಳ ಸಂಕಲನ), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ಕನಕದಾಸರ ಕೀರ್ತನೆಗಳ ಶಬ್ದ ಪ್ರಯೋಗ ಕೋಶ, ಸಂ: ಶ್ರೀನಿವಾಸ ಹಾವನೂರ ಮತ್ತು ವಿ. ಕೃಷ್ಣ, ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ಕನಕದಾಸರ ಕೀರ್ತನೆಗಳು, ಸಂ: ಪಾವಂಜೆ ಗುರುರಾವ್, ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ಕನಕನ ಸುತ್ತಮುತ್ತ: ಸಂಕಥನಗಳ ಜಿಜ್ಞಾಸೆ, ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ (ಕನಕದಾಸ ಅಧ್ಯಯನ ಸಮಗ್ರ ಸಂಪುಟ ಭಾಗ: 1), ಸಂ: ಶಿವರಾಮ ಶೆಟ್ಟಿ ಬಿ., ಪ್ರ: ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ಸಂತಕವಿ ಕನಕದಾಸರು, ಡಾ. ಚಿಕ್ಕಮಗಳೂರು ಗಣೇಶ, ಪ್ರ: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು
ಕಾಲಜ್ಞಾನಿ ಕನಕ (ನಾಟಕ), ಕಿ.ರಂ. ನಾಗರಾಜ

ಇಂಗ್ಲಿಷಿನಲ್ಲಿ

Kanakadas Ramadhanya Charite, Shashidhara G. Vaidya, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
Heritage Sites Associated with the Saint-Poet Kanakadas, Jagannath R. Genannavar, Tr: Shankar D.A., ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
Kanakadasaru, Chikkanna K.T., Tr: Prakash H.S.M., ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
Kanakadas: An Ardent Devotee of Lord Adikeshava, Basavaraj Naikar, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
Kanakadasa's Revolution: A Radical Reading, K. Raghavendra Rao, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
Kanakadasa and the Tradition of Religious Humanism in Karnataka, K. Raghavendra Rao, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ಹಿಂದಿಯಲ್ಲಿ

ಕನಕದಾಸ, ಕಾ.ತ. ಚಿಕ್ಕಣ್ಣ, ಅನು: ಶ್ರೀನಿವಾಸ ಮೂರ್ತಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನ್ನಡ ಸಂತ ಕವಿ ಕನಕದಾಸ, ಸಂ: ಜಗನ್ನಾಥ ಆರ್. ಗೇನಣ್ಣವರ, ಅನು: ಶೋಭಾ ನಾಯಕ, ಚಂದ್ರಕಾಂತ ಪೋಕಾಣೆ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಸಂತ ಕವಿ ಕನಕದಾಸ, ಶಶಿ ಶ್ಯಾಮ್‍ಸಿಂಗ್, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನಕದಾಸ್: ಏಕ್ ಅನುಶೀಲನ್, ನಂದಿನಿ ಗುಂಡೂರಾವ್, ಪ್ರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

ತೆಲುಗಿನಲ್ಲಿ

ಭಕ್ತ ಶ್ರೀ ಕನಕದಾಸರು ಸಂದರ್ವಿನ ಪವಿತ್ರ ಸ್ಥಳಂ, ಜಗನ್ನಾಥ ಆರ್. ಗೇನಣ್ಣವರ, ಅನು: ಪದ್ಮಾ ಸಿ., ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ರಾಮಧಾನ್ಯ (ನಾಟಕ), ರಾಮಕೃಷ್ಣ ಮರಾಠೆ, ಅನು: ಲಕ್ಷ್ಮೀದೇವಿ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನಕದಾಸ, ಕಾ.ತ. ಚಿಕ್ಕಣ್ಣ, ಅನು: ಪುಟ್ಟಮರಾಜ, ಪ್ರ: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಚಲನಚಿತ್ರ ಸಂಪಾದಿಸಿ

ಡಾ. ರಾಜ್‍ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿರುವ 'ಭಕ್ತ ಕನಕದಾಸ' ಚಲನಚಿತ್ರವು 1960ರಲ್ಲಿ ತೆರೆಕಂಡಿದೆ. ನಿರ್ದೇಶಕರು ವೈ.ಆರ್.ಸ್ವಾಮಿ. ಈ ಚಿತ್ರದಲ್ಲಿ ಅಳವಡಿಸಲಾಗಿರುವ ಕನಕದಾಸರ ಕೀರ್ತನೆಗಳನ್ನು ಪಿ.ಬಿ. ಶ್ರೀನಿವಾಸ್ ಅವರು ಹಾಡಿದ್ದಾರೆ. 'ಕುಲಕುಲಕುಲವೆಂದು ಹೊಡೆದಾಡದಿರಿ', 'ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ', 'ದೀನ ನಾನು ಸಮಸ್ತ ಲೋಕಕೆ ದಾನಿ ನೀನು' ಹಾಡುಗಳು ಜನಪ್ರಿಯವಾಗಿವೆ.
(PSGadyal Teacher Vijayapur)

ಕನಕದಾಸ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರಗಳು ಸಂಪಾದಿಸಿ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ , ಕಾಗಿನೆಲೆ
ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಉಡುಪಿ
ಕನಕದಾಸ ಅಧ್ಯಯನ ಪೀಠ / ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾನಿಲಯ
ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು
ಸ್ಮರಣೆ

ಕನಕದಾಸ ಜಯಂತಿ .

ಕರ್ನಾಟಕ ಸರ್ಕಾರವು 2008ರಿಂದ ಕನಕದಾಸ ಜಯಂತಿಯನ್ನು ಆಚರಿಸುತ್ತಿದೆ. ಆ ದಿನ ಸರ್ಕಾರಿ ರಜೆ ಇರುತ್ತದೆ.

ಪ್ರಶಸ್ತಿಗಳು.

ಕರ್ನಾಟಕ ಸರ್ಕಾರವು ಕನಕದಾಸರ ಹೆಸರಿನಲ್ಲಿ ಕನಕ-ಪುರಂದರ ಪ್ರಶಸ್ತಿ ಹಾಗೂ ಕನಕಶ್ರೀ ಪ್ರಶಸ್ತಿಗಳನ್ನು ಪ್ರತಿವರ್ಷ ನೀಡುತ್ತಿದೆ.

Comments

Popular posts from this blog

KARNATAK STATE SSLC RESULT 2024

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*